21 August 2010

{ಮೊನ್ನೆಯಿಂದ ಮುಂದುವರಿಕೆ} ಕರಾವಳಿಯ ಕರೆ...

ಬೇಸಿಗೆ ಹಾಗು ದಸರೆಯ ಶಾಲಾರಜೆಗಳನ್ನು ನಾನು ಜಾತಕಪಕ್ಷಿಯಂತೆ ಕಾಯುತ್ತಿದ್ದೆ.ಈ ಮೊದಲೆ ಹೇಳಿದಂತೆ ನನ್ನ ರಜಾದಿನಗಳನ್ನು ಕಳೆಯಲು ನನಗಿದ್ದದ್ದು ಕೇವಲ ಸೀಮಿತವಕಾಶ.ಒಂದೋ ಅಮ್ಮನ ತವರು ಸಾಗಿನಬೆಟ್ಟಿಗೆ ಅವರೊಂದಿಗೆ ಹೋಗಬೇಕು,ಇಲ್ಲವೆ ಕೊಪ್ಪದಲ್ಲಿದ್ದ ಚಿಕ್ಕಪ್ಪ (ಅಜ್ಜನ ತಮ್ಮ) ನ ಮನೆಗೆ ಹೋಗಬೇಕು,ಅದೂ ಇಲ್ಲದಿದ್ದರೆ ದಬ್ಬಣ gaddeyallidda ಪ್ರಭಾಕರನ್ನನ ಮನೆಗೆ ಹೋಗಬೇಕು ( ಅವ್ರ ಬಗ್ಗೆ ಮುಂದೆ ಹೇಳುತ್ತೇನೆ). ಇವಿಷ್ಟರಲ್ಲಿ ನನ್ನ ಪ್ರಾಥಮಿಕ ಆದ್ಯತೆ ಇರುತ್ತಿದ್ದುದು ಅಮ್ಮನ ಜೊತೆಗೆ ಸಾಗಿನ ಬೆಟ್ಟಿಗೆ ಹೋಗುವುದು.

ಹಳ್ಳಿಯ ವಾತಾವರಣದ ಹಿನ್ನೆಲೆ,ಗದ್ದೆ-ತೋಟಗಳಲ್ಲಿ ಸ್ವಚ್ಛಂದವಾಗಿ ಅಲೆಯುವ ಮುಕ್ತ ಅವಕಾಶ,ನೇಜಿ ನೆಡುವವರ 'ಓ ಬೇಲೆ' ಕೇಳುತ್ತ ಇತ್ತ ಕೋಣಕಟ್ಟಿ ಹೂಡುವವರ 'ಊ ಹು ಊ ಹು ಊ'ರಾಗವನ್ನ ಕೇಳ್ತಾ ಇರುವ ಹಂಬಲ,ಮನೆಯ ಜಾಗದೊಳಗೆ ಬಳುಕುತ್ತ ಹರಿಯುವ 'ಫಲ್ಗುಣಿ'ಯ ನೀರಲ್ಲಿ ಆಡುವ ತವಕ, ಹಟ್ಟಿಯಲ್ಲಿದ್ದ ಹೂಡುವ ಕೋಣಗಳನ್ನು ತೋಡಲ್ಲಿ ಮೀಯಿಸುವಾಗ ತೆಂಗಿನ ಚೊಪ್ಪಿನಲ್ಲಿ ಅವುಗಳ ಮೈ ತಿಕ್ಕುವ ರೋಮಾಂಚನ (ತಿಕ್ಕೋದು ಕಡಿಮೆಯಾಗಿ ನೀರಲ್ಲಿ ಬಿದ್ದು ಹೊಡಕೋದೆ ಜಾಸ್ತಿಯಾಗಿರುತ್ತಿತ್ತು).ಮನೆಗೆ ಅಂಟಿಕೊಂಡಿದ್ದ ಕೆರೆಯಲ್ಲಿ ಅಮ್ಮನ ಅಣ್ಣ ಸುಂದರಮಾವ ಈಜುವಾಗ ನಾನೂ ಕೋಮಣ ಕಟ್ಟಿಕೊಂಡು ಅವರ ಈಜಿನ ಕೊನೆಯಲ್ಲಿ ಕೇವಲ ಐದೇ ಐದು ನಿಮಿಷವಾದರೂ ಅವರಿಂದ ಈಜು ಕಲಿಯುವ ಹಠ ಇವೆಲ್ಲ ಊರಿನತ್ತ ಇರುತ್ತಿದ್ದ ಪ್ರಮುಖ ಆಕರ್ಷಣೆಗಳು.

ಜೊತೆಗೆ ಮನೆಯಲ್ಲಿ ಮಾಡುತ್ತಿದ್ದ ಮೂಡೆ,ಕೊಟ್ಟೆ ಕಡುಬು,ನೀರ್ ತೆಲ್ಲಾವು,ಪುಂಡಿ,ಅರಿ ಸೇಮಿಗೆ-ಕೈ ಪೇರ್,ಉದ್ದು ದೋಸೆ,ಕೆಂಡದಡ್ದಯೇ,ಕಡಲೆಬೇಳೆ ಪಾಯಸಗಳಂತಹ ತುಳು ತಿಂಡಿಗಳು ಮೋಡಿ ಹಾಕುತ್ತಿದ್ದವು.ಅಲ್ಲದೆ ಈ ತಿಂಡಿಗಳೊಡನೆ ಹೇರಳವಾಗಿ ಮೇಯಲು ಸಿಗುತ್ತಿದ್ದ ಮಾವು,ಪೇರಳ-ಸಾಂತಿ-ಕೇಪಳ-ಹಲಸು-ನೇರಳೆ-ಬಿಂಬುಳಿ-ನಲ್ಲಿ ಮುಂತಾದ ಹಣ್ಣುಗಳ ರುಚಿ ಅತ್ತಲೆ ಹೋಗುವಂತೆ ಪ್ರೇರೇಪಿಸುತ್ತಿದ್ದವು ಅನ್ನಿಸುತ್ತದೆ.ಇವೆಲ್ಲದರ ಬಾಲ ಹಿಡಿದು ಅಮ್ಮನೊಟ್ಟಿಗೆ ಊರಿಗೆ ಹೋಗಲು ಸದಾಒಂತಿ ಕಾಲಲ್ಲಿ ನಿಂತಿರುತ್ತಿದ್ದೆ.ಅಲ್ಲಿಂದ ತೀರ್ಥಹಳ್ಳಿಗೆ ಮರಳಿ ಬರುವಾಗ ಕಾರ್ಕಳದ ಕಾಬೇತ್ತಿನಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ಒಂದು ದಿನ,ಹಾಗು ಮುನಿಯಾಲಿನ ಬಳಿಯ ಗುದ್ದೆಮನೆಯಲ್ಲಿದ್ದ ಅಜ್ಜನ ಮನೆಯಲ್ಲಿ ಒಂದು ದಿನ ಕಳೆಯಲು ಸಿಗುತ್ತಿದ್ದ ಸಂತಸದ ವೇಳೆ ಸಾಗಿನ ಬೆಟ್ಟಿಗೆ ಹೋಗಲು ಇದ್ದ ಪ್ರಮುಖ ಆಕರ್ಷಣೆ.


ಹಾಗಂತ ಊರಿಗೆ ಹೋಗುವಾಗಲೆಲ್ಲ ಅಮ್ಮ ನನ್ನನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದರು ಎಂದೇನಲ್ಲ.ಹಲವಾರು ಬಾರಿ ನನ್ನ ಶಾಲಾ ದಿನಗಳಲ್ಲೇ ಅವರು ಊರಿಗೆ ಹೊರಡುತ್ತಿದ್ದುದೂ ಉಂಟು,ಆಗೆಲ್ಲ ನಾನು ಅದೆಷ್ಟೇ ಅತ್ತು-ಕರೆದು ರಂಪ ಮಾಡುತ್ತಿದ್ದರೂ ಫಲ ಮಾತ್ರ ನಾಸ್ತಿ.ಅಂತಹ ಸಂದರ್ಭಗಳಲ್ಲಿ ಅಡುಗೆ ಮನೆಯ ಮೂಲೆಯಲ್ಲಿರುತ್ತಿದ್ದ ನಾಗರಬೆತ್ತಕ್ಕೆ ನನ್ನ ಮೇಲೆ ಸವಾರಿ ಮಾಡಲು ಮುಫತ್ ಅವಕಾಶ ಬೇರೆ ಸಿಗುತ್ತಿತ್ತು!.ಬರುಬರುತ್ತಾ ಈ ಪೆಟ್ಟಿನ ಹೆದರಿಕೆಯಿಂದ ನಾನು ಹಟ ಕಡಿಮೆ ಮಾಡಿದೆನಾದರೂ ಪೂರ್ತಿ ರಾಜಿ ಯಾಗಲಿಲ್ಲ.ಆದ ರಾಜಿಸೂತ್ರದ ಪ್ರಕಾರ ಅಮ್ಮ ನನ್ನನ್ನು ಊರಿಗೆ ಕರೆದೊಯ್ಯದ ಸಂದರ್ಭಗಳಲ್ಲಿ ಅವರಿಗಾಗಿ ಬಸ್ಸಿನಲ್ಲಿ ಸೀಟು ಹಿಡಿಯುವುದಕ್ಕಷ್ಟೇ ನನ್ನ ಹಾರಾಟದ ಕಾರ್ಯವ್ಯಾಪ್ತಿ ಸೀಮಿತವಾಯ್ತು.


ಈ ಸೀಟು ಹಿಡಿಯುವುದು ನನಗಾಗ ಒಂದು ಮೋಜಿನ ಆಟ.ತೀರ್ಥಹಳ್ಳಿ ಪಟ್ಟಣದ ಚಹರೆಪಟ್ಟಿಯ ಅರಿವು ನಿಮಗಿದ್ದಲ್ಲಿ ಮುಂದೆ ನಾನು ಕೊಡುವ ವಿವರಣೆ ಸರಳವಾಗಿ ನಿಮಗೆ ಅರ್ಥವಾದೀತು.ಶಿವಮೊಗ್ಗದಿಂದ ಸುಮಾರು ೬೦ ಕಿಲೋಮೀಟರ್ ದೂರದಲ್ಲಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಜ್ಯಹೆದ್ದಾರಿಯಲ್ಲಿ ನಮ್ಮೂರಿದೆ ( ಈಗ ಅದು ರಾಷ್ಟ್ರೀಯಹೆದ್ದಾರಿಯ ದರ್ಜೆಗೇರಿದೆ).ಹೀಗಾಗಿ ಮಂಗಳೂರು,ಸಾಗರ,ಹೊಸನಗರ,ಕುಂದಾಪುರಗಳತ್ತ ಸಾಗುವ ಬಸ್ಸುಗಳದ್ದೊಂದು ದಿಕ್ಕಾದರೆ,ಶಿವಮೊಗ್ಗ,ಬೆಂಗಳೂರಿಗೆ ಸಾಗುವ ಬಸ್ಸುಗಳದ್ದು ಇನ್ನೊಂದು.ಇನ್ನು ಕೊಪ್ಪ-ಶೃಂಗೇರಿಗಳ ಕಡೇ ಸಾಗುವವದ್ದು ಮೆಲಿನೆರಡರ ನಡುವಿನ ದಾರಿ.ಹೀಗಾಗಿ ಈ ಗೊಂದಲಾಪುರದಲ್ಲಿ ಮೂರ್ಮೂರು ಬಸ್ ನಿಲ್ದಾಣಗಳಿವೆ.ಮುಖ್ಯಬಸ್ ನಿಲ್ದಾಣ ಕೆಳಗಿನಸ್ಟ್ಯಾಂಡ್ ಎಂದು ಕರೆಯಿಸಿ ಕೊಂಡರೆ,ಉಳಿದೆರಡು ಮೇಲ್ ಸ್ಟ್ಯಾಂಡ್ ಹಾಗು ಕೊಪ್ಪಸ್ಟ್ಯಾಂಡ್ ಎನ್ನಲಾಗುತ್ತದೆ.ಈ ಮೂರೂ ದಿಕ್ಕಿನಿಂದ ಬರುವ ಬಸ್ಸುಗಳು ಮುಖ್ಯ ಬಸ್ ನಿಲ್ದಾಣಕ್ಕೆ ಬರುವುದು ಖಡ್ಡಾಯವಾದರೂ ಉಳಿದಂತೆ ತಮ್ಮತಮ್ಮ ದಿಕ್ಕಿನ ಕಡೆಗಿನ ನಿಲ್ದಾಣಗಳಲ್ಲೇ ಹೆಚ್ಚು ಸಮಯ ನಿಲ್ಲುತ್ತವೆ.ಈ ಮೂರೂ ನಿಲ್ದಾಣಗಳ ನಡುವೆ ಒಂದೊಂದು ಕಿಲೋಮೀಟರ್ ಅಂತರವಿದೆ.
ಈಗಲೂ ಅಲ್ಲಿ ಇದೆ ಪರಿಸ್ಥಿತಿಯಿದೆ,



ಶಿವಮೊಗ್ಗದಿಂದ ಮಂಗಳೂರಿನತ್ತ ಸಾಗುವ ಬಹುತೇಕ ಬಸ್ಸುಗಳೆಲ್ಲ ಹೆಬ್ರಿ-ಉಡುಪಿ ಮಾರ್ಗವಾಗಿಯೆ ಹೋಗುತ್ತಿದ್ದರಿಂದ ಕಾರ್ಕಳ-ಮೂಡಬಿದ್ರಿಗಳ ಕಡೆಗೆ ಸಾಗುವ ಬಸ್ಸುಗಳು ಕಡಿಮೆಯಿದ್ದವು.ಈ ಮಾರ್ಗವಾಗಿ ಸಾಗಿದರೂ ಉಡುಪಿ ಮೇಲೆ ಸಾಗಿದಷ್ಟೇ ಮಂಗಳೂರಿಗೆ ಅಂತರ ಇದ್ದರೂ ರಸ್ತೆ ಹೋಲಿಕೆಯಲ್ಲಿ ಅಷ್ಟು ಚೆನ್ನಾಗಿರದ ಕಾರಣ ( ಉಡುಪಿಯಿಂದ ರಾಷ್ಟ್ರೀಯ ಹೆದ್ದಾರಿ ಚೆನ್ನಾಗಿದೆ) ಹಾಗು ಮಣಿಪಾಲದತ್ತ
ಚಿಕಿತ್ಸೆಗಾಗಿ ಸಾಗುವ ರೋಗಿ ಪ್ರಯಾಣಿಕರ ಸಂಖ್ಯೆಯೂ ಗಣನೀಯವಾದುದರಿಂದ ಆರ್ಥಿಕ ಹಿತದೃಷ್ಟಿಯಿಂದ ಮಂಗಳೂರಿಗೆ ಹೋಗುವ ಬಸ್ಸುಗಳೆಲ್ಲ ಅದೆ ಮಾರ್ಗವಾಗಿ ಸಂಚರಿಸುತ್ತಿದ್ದವು.ಹೀಗಾಗಿ ಮೂಡುಬಿದ್ರಿ-ಕಾರ್ಕಳದ ದಿಕ್ಕಿಗೆ ಧಾರಾಳ ಬಸ್ಸಿನ ಕೊರತೆಯಿತ್ತು.ಒಂದೋ ಮಂಗಳೂರಿನ ಬಸ್ಸಿನಲ್ಲಿ ಹೆಬ್ರಿ ಮುಟ್ಟಿ ಅಲ್ಲಿ ಇನ್ನೊಂದು ದಿಕ್ಕಿನ ಬಸ್ ಬದಲಿಸಬೇಕಿತ್ತು,ಇಲ್ಲವೋ ಇದು ಹೆಚ್ಚು ತ್ರಾಸ ಎಂದೆನಿಸಿದರೆ ಸಾಗರದಿಂದ ಗುರುವಾಯನಕೆರೆಗೆ ಹೋಗುತ್ತಿದ್ದ 'ಪುಷ್ಪದಂತ' ಹಾಗು 'ನವಶಕ್ತಿ' ಎನ್ನುವ ಎರಡು ಬಸ್ಸುಗಳಿದ್ದವು,ಸಾಮಾನ್ಯವಾಗಿ ಧರ್ಮಸ್ಥಳಕ್ಕೆ ಹೋಗುವ ಭಕ್ತಕೋಟಿಯಿಂದ ತುಂಬಿ ತುಳುಕಾಡುತ್ತಿದ್ದ ಅವನ್ನೇ ಕಾದು ಒಂಟಿಕಾಲಲ್ಲಿ ನಿಂತಾದರೂ ಊರು ಸೇರ ಬೇಕಿತ್ತು.ತೀರ್ಥಹಲ್ಲಿಗೂ ಮೂಡಬಿದ್ರಿಗೂ ಸರಿ ಸುಮಾರು ನೂರು ಕಿಲೋಮೀಟರ್ ಅಂತರ ಹಾಗು ಎರಡೂ ಎರಡೂವರೆ ಗಂಟೆಗಳ ದೀರ್ಘ ಪ್ರಯಾಣ ಹೀಗಾಗಿ ನಿಂತು ಸಾಗೋದು ಕಷ್ಟ.ಸಾಲದ್ದಕ್ಕೆ ಆಗುಂಬೆ ಘಾಟಿಯ ಕಡಿದಾದ ತಿರುವುಗಳಲ್ಲಿ ಪದೇ ಪದೇ ಒತ್ತಿಸಿಕೊಳ್ಳುವ ಬಸ್ಸಿನ ಬ್ರೇಕಿಗೆ ಹಚ್ಚಿರುವ ಕೀಲೆಣ್ಣೆ ಡೀಸಲ್ ಘಮದೊಂದಿಗೆ ಹೊರಹೊಮ್ಮಿಸುವ ದರಿದ್ರ ವಾಸನೆ .ಈ ವಾಸನೆಗೆ ತಲೆ ತಿರುಗಿದಂತಾಗಿ ಹೊಟ್ಟೆ ತೊಳಿಸಿ ಪ್ರಯಾಣದುದ್ದಕ್ಕೂ ಬಕ ಬಕ ವಾಂತಿ ಮಾಡಿಕೊಳ್ಳುತ್ತ ತಿಂದದ್ದನೆಲ್ಲ ಕಾರಿಕೊಳ್ಳುವ ಮಂಜುನಾಥನ ಭಕ್ತಕೋಟಿ!ಒಂದಾ? ಎರಡ? ಈ ಎಲ್ಲ ವಿವಿಧ ವಿನೋದಾವಳಿಗಳನ್ನು ನೋಡಿಯೇ ಸವಿಯಬೇಕು.ಒಟ್ಟಿನಲ್ಲಿ ಇದೊಂಥರಾ ಕಾಲಾಪಾನಿ ಶಿಕ್ಷೆ.ಈ ಎಲ್ಲ ರಗಳೆಗಳಿಂದ ಮುಕ್ತರಾಗ ಬೇಕಿದ್ದಲ್ಲಿ ಸೀಟು ಹಿಡಿದು ಕೂತು ಪ್ರಯಾಣಿಸಬೇಕು.

{ನಾಳೆಗೆ ಮುಂದುವರೆಸುವೆ}

No comments: